ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಸ್ಮರಣಾರ್ಥ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಶನಿವಾರ ನಗರದ ಗಾಂಧಿ ಭವನದಲ್ಲಿ ನಡೆಯಿತು.
ಜನತಾ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ಬಂಧು ಕಾರ್ಯಕ್ರಮ ಉದ್ಘಾಟಿಸಿ, ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಭಾರತ ಕಂಡ ಅಪರೂಪದ ರಾಜಕಾರಣಿಯಾಗಿದ್ದರು. ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಕೊಡುಗೆ ನೀಡಿದ್ದಾರೆ. ಮಾಜಿ ಪ್ರಧಾನಿ ಚಂದ್ರಶೇಖರ್ ಮತ್ತು ರಾಮಕೃಷ್ಣ ಹೆಗಡೆಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ದೇಶದೆಲ್ಲಡೆ ಸುಮಾರು 10 ಲಕ್ಷ ಪತ್ರ ಸಂಗ್ರಹಿಸುವ ಅಭಿಯಾನ ನಡೆಸಲಾಗುವುದು. ಕರ್ನಾಟಕದಿಂದಲೇ ಈ ಪತ್ರ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಇದಕ್ಕೆ ಕರ್ನಾಟಕ, ಬಿಹಾರ, ಅಸ್ಸಾಂ, ಗುಜರಾತ್ ಎಲ್ಲ ರಾಜ್ಯಗಳಿಂದ ನೈತಿಕ ಬೆಂಬಲದ ಅಗತ್ಯವಿದೆ ಎಂದು ಹೇಳಿದರು.
ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್ ಮಾತನಾಡಿ, ಮೌಲ್ಯಾಧಾರಿತ ರಾಜಕಾರಣದ ರೂವಾರಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 100ನೇ ಜನ್ಮದಿನದ ಆಚರಣೆಯ ಅಂಗವಾಗಿ ಪಕ್ಷದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ವಿವಿಧ ಕ್ಷೇತ್ರಗಳ ಸಾಧಕರು, ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಯಲ್ಲಿ ಗಮನಾರ್ಹ ಕೊಡುಗೆ ನೀಡಿದ ಪ್ರಮುಖರು ಸನ್ಮಾನವನ್ನು ಸ್ವೀಕರಿಸಿದ್ದಾರೆ. ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಾಧಕ ಹಾಗೂ ಶ್ರಮಜೀವಿ ರೈತರನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಈ ಮೂಲಕ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶಶಿಕಾಂತ್ ಗುರೂಜಿ ಅವರಿಗೆ 2026-27ನೇ ಸಾಲಿನ ಮೌಲ್ಯಾಧಾರಿತ ಕಾಯಕಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯವಾಗಿದೆ. ಕಳೆದ ನಾಲ್ಕು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿ, ವಿವಿಧ ಜಿಲ್ಲೆಗಳಿಗೆ ಪದಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಈ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುವುದು ಸಾರ್ಥಕತೆ ತಂದಿದೆ ಎಂದು ಎಂದರು.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮಾದೇಗೌಡ, ರಾಜ್ಯ ರೈತ ಘಟಕದ ಅಧ್ಯಕ್ಷ ಭೈರೇಗೌಡ, ಚಲನಚಿತ್ರ ನಿರ್ಮಾಪಕ ಉಮೇಶ್ ಬಣಕಾರ್, ಬೆಂಗಳೂರು ನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.















