ಬೆಂಗಳೂರು: ರಾಷ್ಟ್ರೀಯ ಸಮಾಜ ಪಕ್ಷದ 23ನೇ ಸಂಸ್ಥಾಪನಾ ದಿನಾಚರಣೆಯನ್ನು ನಗರದ ಗಾಂಧಿಭವನದಲ್ಲಿ ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಪಕ್ಷದ ಕಾರ್ಯಕರ್ತರ, ಪದಾಧಿಕಾರಿಗಳ ಸಮಾವೇಶವನ್ನು ಸಹ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಿವಲಿಂಗಪ್ಪ ಕಿನ್ನೂರ್, ಆರ್ಎಸ್ಪಿ ದೇಶದ 17ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿದ್ದು, ಬಲವಾದ ಸಂಘಟನೆಯನ್ನು ಹೊಂದಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಪಕ್ಷದ ಶಾಸಕರು ಮತ್ತು ಕಾರ್ಪೊರೇಟರ್ಗಳನ್ನು ಆಯ್ಕೆಯಾಗಿದ್ದು, ಈ ಮೂಲಕ ಪಕ್ಷ ತನ್ನ ರಾಜಕೀಯ ಪ್ರಭಾವವನ್ನು ಸಾಬೀತುಪಡಿಸಿದೆ ಎಂದರು.
ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಲಾಗಿದೆ. ಮುಂಬರುವ ಜಿಬಿಎ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಕ್ಷವು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮುಂಬರುವ ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಕನಿಷ್ಠ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 10 ಸ್ಥಾನಗಳಲ್ಲಾದರೂ ಜಯಗಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.
ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ, ಮಹಾರಾಷ್ಟ್ರ ರಾಜ್ಯದಿಂದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಲವು ಯುವಕರು ಹಾಗೂ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ಸಿದ್ಧಪ್ಪ ಅಕ್ಕಿಸಾಗರ್, ರಾಷ್ಟ್ರೀಯ ಕಾರ್ಯದರ್ಶಿ ಗೋವಿಂದರಾಮ್ ಶುರ್ನಾರ್, ರಾಜ್ಯ ಮುಖಂಡರುಗಳಾದ ಶರಣಬಸಪ್ಪ ದೊಡ್ಡಮನಿ, ಶಿವಲಿಂಗಪ್ಪ ಜೋಗಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.















