ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ ಉತ್ತಮ ಮನಸ್ಥಿತಿ ಬೆಳೆಸುವಲ್ಲಿ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕ್ರೀಡಾ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಶನಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಓದಿಗೆ ಸೀಮಿತವಾಗಬಾರದು. ಓದಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ಶಿಸ್ತು, ಸಮಯಪಾಲನೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಒಂದರಿಂದ ಎರಡು ಗಂಟೆ ಆಟೋಟಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಹ ಸದೃಢವಾಗುವುದರ ಜತೆಗೆ ಮನಸ್ಸು ನೆಮ್ಮದಿಯಾಗಿರುತ್ತದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಓದಿನ ಮೇಲೂ ಗಮನ ಕೇಂದ್ರೀಕರಿಸಲು ಮತ್ತು ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ವೇದಿಕೆಯಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಇಂತಹ ಸಂಸ್ಥೆಗಳಿಗೆ ಸೇರಿಸಬೇಕು. ಸಂಸ್ಥೆಯ ಬೆಳವಣಿಗೆಗೆ ಸರ್ಕಾರದ ಕಡೆಯಿಂದ ಅಗತ್ಯ ಸಹಕಾರ ನೀಡಲಾಗುವುದು. ಅರಣ್ಯ ಹಾಗೂ ವನ್ಯಜೀವಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ಕೂ ಇಲಾಖೆಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಿ.ಕೃಷ್ಣಯ್ಯ ಚೆಟ್ಟಿ ಫೌಂಡೇಶನ್ ವ್ಯವಸ್ಥಾಪಕ ಟ್ರಸ್ಟಿ ವಿನೋದ್ ಹಯಗ್ರೀವ್ ಮಾತನಾಡಿ, ತಂತ್ರಜ್ಞಾನ ಬೆಳೆದಂತೆ ನಗರಗಳು ಮತ್ತು ಉದ್ಯೋಗದ ಸ್ವರೂಪ ಬದಲಾಗಬಹುದು. ಆದರೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಭೂತ ಮೌಲ್ಯಗಳು ಎಂದಿಗೂ ಬದಲಾಗುವುದಿಲ್ಲ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೌಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಡಾ.ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಭವಿಷ್ಯದ ನಾಯಕರ ಸೃಷ್ಟಿಗೆ ಪ್ರಯತ್ನದಲ್ಲಿ, ಪರಿಸರ ಸಂರಕ್ಷಣೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸುವುದು ಸೇರಿದಂತೆ ಪರಿಸರ ಸಂರಕ್ಷಣಾ ಕಾರ್ಯಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ಅವರಲ್ಲಿ ಪ್ರೇರಣಾಶಕ್ತಿ ಬೆಳೆಸಲಾಗುತ್ತಿದೆ ಎಂದು ಹೇಳಿದರು.
ಜೈನ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಜೆನ್ರಾಜ್ ಜೈನ್ ಮಾತನಾಡಿ, ಸ್ಕೌಟ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಶಿಸ್ತು ಹಾಗೂ ನಾಯಕತ್ವದ ಗುಣಗಳ್ನನು ಬೆಳೆಸಲು ಸಹಕಾರಿಯಾಗುತ್ತವೆ. ನಾನು ಶಾಲಾ ದಿನಗಳಲ್ಲಿ ಸ್ಕೌಟ್ಸ್ ವಿದ್ಯಾರ್ಥಿಯಾಗಿದ್ದರಿಂದ ಅದರ ಮಹತ್ವ ಮತ್ತು ಮೌಲ್ಯಗಳ್ನನು ಅರಿತಿದ್ದೇನೆ ಎಂದರು.














