ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಂದೇ ಕುಟುಂಬದ ರಾಜಕಾರಣದಿಂದ ಬೇಸತ್ತ ಮತದಾರ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬುದ್ಧಿ ಕಲಿಸಲು ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮುಸ್ಲಿಮರ ಮತಗಳಿವೆ. ತಮಗೆ ಒಂದು ಟಿಕೆಟ್ ನೀಡಿ ಅಂತ ಕೇಳಿದ್ದರು. ಆದರೆ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಲಿಲ್ಲ. ಈಗ ಅದೇ ಸ್ವಾಭಿಮಾನಿ ಮುಸ್ಲಿಮರು ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ ಎಂದರು.
ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಪರಿಸ್ಥಿತಿ ಬದಲಾಗಿದೆ. ದಾವಣಗೆರೆ ಮತ್ತು ಬಾಗಲಕೋಟದಲ್ಲಿ ಬಿಜೆಪಿ ಗೆಲ್ಲಲಿದೆ. ಎರಡೂ ಕಡೆ ನಮ್ಮ ಅಭ್ಯರ್ಥಿಗಳೇ ಹೆಚ್ಚಿನ ಮತಗಳ ಅಂತರದಲ್ಲಿ ಜಯಭೇರಿ ಸಾಧಿಸಲಿದ್ದಾರೆ. ನಮ್ಮ ಪಕ್ಷದ ಮುಖಂಡರು ಒಂದಾಗಿ, ಒಟ್ಟಾಗಿ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಗದ್ದಲ ನಡೆಯುತ್ತಾ ಇದೆ. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಜಂಭ ಕೊಚ್ಚಿಕೊಂಡು ಅದಕ್ಕೆ ನಾಲ್ಕೈದು ಪಟ್ಟು ತೆರಿಗೆ ಹೆಚ್ಚಳ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸಾಧನೆ ಅಂದರೆ ಐದೂವರೆ ಲಕ್ಷ ಕೋಟಿ ಸಾಲ ಮಾಡಿರುವುದು ಅಷ್ಟೇ. ಪ್ರತಿಯೊಂದು ಕುಟುಂಬದ ಮೇಲೆ ಭಾರ ಹಾಕಿದ್ದಾರೆ. ಇದೊಂದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ಗೆ ಎರಡು ಸೀಟು ಕಳೆದುಕೊಂಡರೂ ಸರ್ಕಾರಕ್ಕೆ ಏನೂ ಆಗಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಗರ ಕಿವಿ ಹಿಂಡುವ ಕೆಲಸವನ್ನು ಮತದಾರ ಈ ಮೂಲಕ ಮಾಡಿದಂತೆ ಆಗಲಿದೆ. ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿ ಎಂದು ಇಲ್ಲಿನ ಜನರು ನಿರೀಕ್ಷಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.















