ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅನ್ವಯಿಸದೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಹಾಗೂ ಒಳ ಮೀಸಲಾತಿ ಜಾರಿಗೊಳಿಸಲು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹ ರಾಜ್ಯಪಾಲರಿಗೆ ಪತ್ರ ಬರೆದು ಒತ್ತಾಯಿಸಿದೆ.
ಈ ಕುರಿತು ಮಾತನಾಡಿರುವ ಯುವ ಸಮೂಹದ ರಾಜ್ಯಾದಕ್ಷ ಎಸ್ ಸಂಗಮೇಶ್, ಯಾವುದೇ ನ್ಯಾಯಾಲಯವು ಒಳಮೀಸಲಾತಿಯನ್ನು ಸ್ಥಗಿತಗೊಳಿಸುವ ಅಥವಾರದ್ದು ಪಡಿಸುವ ಆದೇಶ ನೀಡದಿದ್ದರೂ ಸಹ, ಇದೇ ಫೆಬ್ರವರಿ 27 ರಂದು ಹೊರಡಿಸಿರುವ ಸರ್ಕಾರದ ಆದೇಶದ ಒಳ ಮೀಸಲಾತಿಯನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ ಎನ್ನುವುದನ್ನು ತೋರಿಸುತ್ತಿದೆ. ಈ ಕ್ರಮದಿಂದ ಪರಿಶಿಷ್ಟ ಜಾತಿಗಳ, ವಿಶೇಷವಾಗಿ ಮಾದಿಗ ಸಮುದಾಯದ ಸಂವಿಧಾನಬದ್ಧ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಈ ಸಮುದಾಯ ಸುಮಾರು 3500ಕ್ಕೂ ಹೆಚ್ಚು ಹುದ್ದೆಗಳು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
2022ರ ಕಾಯ್ದೆ ಜಾರಿಯಲ್ಲಿರುವ ಸಂದರ್ಭದಲ್ಲೇ 1995ರ ಸರ್ಕಾರದ ಆದೇಶವನ್ನು ಆಧರಿಸಿ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿರುವುದು ಕಾನೂನುಬಾಹಿರವಾಗಿದೆ. ಅನ್ಯಾಯ ಮತ್ತು ಉದ್ದೇಶಪೂರ್ವಕ ಆಡಳಿತಾತ್ಮಕ ದುರುಪಯೋಗ ಆಗಿದೆ. ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ದ ಹಕ್ಕುಗಳ ರಕ್ಷಣೆಯ ಹೊಣೆಗಾರಿಕೆಯನ್ನು ಮನಗಂಡು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ 2023ರ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ವಿಧೇಯಕ ಮಂಡಿಸಿ ತಕ್ಷಣ ಗೆಜೆಟ್ ನಲ್ಲಿ ಪ್ರಕಟಿಸಬೇಕು. ನೇಮಕಾತಿ ಆದೇಶಗಳನ್ನು ತಕ್ಷಣವೇ ರದ್ದುಪಡಿಸಬೇಕು. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಎಲ್ಲಾ ನೇಮಕಾತಿಗಳನ್ನು ಒಳ ಮೀಸಲಾತಿಯೊಂದಿಗೆ ಮಾತ್ರ ನಡೆಸಬೇಕು. ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಗಳ ಎಲ್ಲಾ ಕ್ಷೇತ್ರಗಳಲ್ಲಿ ಒಳ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಮೂಹದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ಮಾತನಾಡಿ, ಶಿಕ್ಷಣ ಹಾಗೂ ಉದ್ಯೋಗದ ಎಲ್ಲಾ ಹಂತಗಳಲ್ಲಿ ಒಳ ಮೀಸಲಾತಿ ಕಡ್ಡಾಯಗೊಳಿಸಬೇಕು. 2001ರಿಂದ ಬಾಕಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ವಿಶೇಷ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಅನುಮೋದನೆ ಪಡೆದ. ಜೊತೆಗೆ ರಾಜ್ಯಪಾಲರ ಅಂಕಿತ ಕೂಡ ಒಳಮೀಸಲಾತಿ ಕಾಯ್ದೆಗೆ ದೊರೆತಿದ್ದು, ಆದಾಗ್ಯೂ ಇಂದಿನವರೆಗೆ ಈ ವಿಧೇಯಕವನ್ನು ಗೆಜೆಟ್ ನಲ್ಲಿ ಪ್ರಕಟಿಸದೇ ಸಂವಿಧಾನಬದ್ಧ ಪ್ರಕ್ರಿಯೆಯ ಉಲ್ಲಂಘನೆ ಮಾಡಲಾಗುತ್ತಿದೆ. ಇದು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.















