ಬೆಂಗಳೂರು: ಕರ್ನಾಟಕ ರಾಜ್ಯ ಅದಿಜಾಂಬವ ಕ್ಷೇಮಾಭಿವೃದ್ಧಿ ಸಂಘವು ಸೋಮವಾರ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದೆ.
ಈ ಕುರಿತು ಸಂಘದ ರಾಜ್ಯಾಧ್ಯಕ್ಷ ಕೆ. ಆರ್. ರಾಜಯ್ಯ ಮಾತನಾಡಿ, ಡಾ. ಡಿ. ತಿಮ್ಮಯ್ಯ ಹಲವು ದಶಕಗಳಿಂದ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಮಾಜದ ಧ್ವನಿಯಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಪರಿಶಿಷ್ಟ ಜಾತಿಯ ವಂಚಿತ ಸಮುದಾಯಗಳಿಗೆ ಮತ್ತಷ್ಟು ನ್ಯಾಯ ದೊರೆಯಲಿದೆ ಎಂದು ಹೇಳಿದರು.
ಅದಿಜಾಂಬವ ಸೇರಿದಂತೆ ಪರಿಶಿಷ್ಟ ಜಾತಿಯ ಅತ್ಯಂತ ಹಿಂದುಳಿದ ಸಮುದಾಯಗಳ ಪರವಾಗಿ ಡಾ. ಡಿ. ತಿಮ್ಮಯ್ಯ ನಿರಂತರವಾಗಿ ಹೋರಾಟ ನಡೆಸಿದ್ದಾರೆ. ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಇದೆ ಸಂಧರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಡತೊರೆ ಎಂ ನಿಂಗರಾಜ್ ಮಾತನಾಡಿ, ಪದಾಧಿಕಾರಿಗಳು, ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕುವ ನಿಟ್ಟಿನಲ್ಲಿ ಒಳಮೀಸಲಾತಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಡಾ. ಬಿ. ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ಅನುಗುಣವಾಗಿ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಒಳಮೀಸಲಾತಿ ಜಾರಿಗೊಂಡಿದ್ದು, ಇದರಿಂದ ವಂಚಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ನ್ಯಾಯಯುತ ಅವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.
ಒಳಮೀಸಲಾತಿ ಕುರಿತಂತೆ ಯಾವುದೇ ಗೊಂದಲ ಅಥವಾ ವಿಳಂಬ ಉಂಟಾಗದಂತೆ ಸರ್ಕಾರ ಶೀಘ್ರದಲ್ಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಂಘದ ಪದಾಧಿಕಾರಿಗಳು ಒಕ್ಕೂರಲಿಂದ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ. ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ಡಿ. ಕುಮಾರ್ ಹಾಗೂ ಸಹಾಯಕ ಕಾರ್ಯದರ್ಶಿ ವಿಜಯಕುಮಾರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.















