ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜು.11ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಮಭಿಮಾನದ ಅಭಿನಂದನೆ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಸಂತೋಷ್ ಹೆಚ್ ಮಾಹಿತಿ ನೀಡಿದರು.
ಕಾರ್ಯಕ್ರಮದ ಕುರಿತು ಪ್ರಜಾ ನೆರಳು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಮಹತ್ವದ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 2026ನೇ ವರ್ಷದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ 10 ಜಿಲ್ಲೆಗಳ ಸುಮಾರು 3,000 ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಈ ವರ್ಷದ ಪುರಸ್ಕಾರಕ್ಕೆ ರಾಜ್ಯಾದ್ಯಂತ ಒಟ್ಟು 11,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ವಿವಿಧ ಇಲಾಖೆಗಳ ಪದಾಧಿಕಾರಿಗಳು, ನೌಕರರು ಮತ್ತು ಪೋಷಕರು ಆಗಮಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಗಳನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಒತ್ತಾಯ:
ಎನ್.ಪಿ.ಎಸ್. ಸಮಿತಿಯಿಂದ ತಕ್ಷಣವೇ ವರದಿ ಪಡೆದುಕೊಂಡು, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿಗೊಳಿಸಬೇಕು ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಪತ್ರವನ್ನು ಕಾರ್ಯಕ್ರಮದಲ್ಲಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆಯಿಂದ ನೌಕರಿಗೆ ಒತ್ತಡ:
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಇಲಾಖೆಗಳ ಎಸ್ಐಆರ್ ಸಮೀಕ್ಷಾ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿ ಎದುರಿಸುತ್ತಿರುವ ತೀವ್ರ ಮಾನಸಿಕ ಒತ್ತಡ, ಆರೋಗ್ಯ ಮತ್ತು ಸುರಕ್ಷತೆಯ ಸಮಸ್ಯೆಗಳ ಕುರಿತು ಸಂಘವು ಕಳವಳ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಒತ್ತಡ ಮುಕ್ತ ಕಾರ್ಯದಿನಕ್ಕೆ ಆಗ್ರಹ:
ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಸಮೀಕ್ಷೆಯ ಕಾರ್ಯದಿನಗಳನ್ನು ನಿಗದಿಪಡಿಸಿ, ನೌಕರರ ಮೇಲಿನ ಅನಗತ್ಯ ಒತ್ತಡವನ್ನು ತಪ್ಪಿಸಬೇಕು. ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಅನಧಿಕೃತ ವ್ಯಕ್ತಿ ಅಥವಾ ಸಂಘಟನೆಗಳು ಹಸ್ತಕ್ಷೇಪ ಮಾಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತೋಷ್ ಹೆಚ್ ಆಗ್ರಹಿಸಿದರು.















