ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾಲಯ ಮತ್ತು ಅದರಡಿಯ ಸ್ವಾಯತ್ತ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗುವಂತಹ ಬೆಳವಣಿಗೆಗಳು ನಡೆಯುತ್ತಿದ್ದು, ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜ್ಯದ ಕೃಷಿ ವಿದ್ಯಾರ್ಥಿಗಳ ಸಂಘಟನೆಗಳು ಒತ್ತಾಯಿಸಿವೆ.
ಈ ಕುರಿತು ಶನಿವಾರ ಪ್ರೆಸ್ ಕ್ಲಬ್ ಆಫ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕೃಷಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ಕೃಷಿ ಶಿಕ್ಷಣದ ಗುಣಮಟ್ಟ, ಭಾರತೀಯ ಕೃಷಿ ಮಂಡಳಿ ಮಾನ್ಯತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಮಹತ್ವದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ರಾಜ್ಯದ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಅಧ್ಯಯನ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗುವಂತಹ ಬೆಳವಣಿಗೆಗಳು ನಡೆಯುತ್ತಿದ್ದು, ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಲ್ಲಿ ಕೃಷಿ ಶಿಕ್ಷಣದ ತಾಂತ್ರಿಕ ಹುದ್ದೆಗಳಿಗೆ ಎಐಸಿಟಿಇ ಮಾನ್ಯತೆಯ ಬದಲು ಭಾರತೀಯ ಕೃಷಿ ಮಂಡಳಿ ಮಾನ್ಯತೆ ಮುಂದುವರಿಸಬೇಕು. ಈಗಾಗಲೇ ಭಾರತೀಯ ಕೃಷಿ ಮಂಡಳಿ ಮಾನ್ಯತೆ ಪಡೆದಿರುವ ಕೃಷಿ ಪದವೀಧರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಾರತೀಯ ಕೃಷಿ ಮಂಡಳಿ ಮಾನ್ಯತೆ ಇಲ್ಲದ ಖಾಸಗಿ ಕೃಷಿ ಕಾಲೇಜುಗಳಿಗೆ ಯಾವುದೇ ರೀತಿಯ ಹೊಸ ಸಂಯೋಜನೆ ನೀಡಬಾರದು. ಡಯಾಸಿ ಯೋಜನೆಯಡಿ ನಡೆಯುತ್ತಿರುವ ಪ್ರವೇಶ ಪ್ರಕ್ರಿಯೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಸೇರಿದಂತೆ ಎಲ್ಲಾ ತಾಂತ್ರಿಕ ಹುದ್ದೆಗಳ ನೇಮಕಾತಿಯನ್ನು ಪಾರದರ್ಶಕವಾಗಿ ನಡೆಸಬೇಕು. ಅಗತ್ಯವಿದ್ದಲ್ಲಿ ಸಿ ಅಂಡ್ ಆರ್ ನಿಯಮಗಳನ್ನು ತಿದ್ದುಪಡಿ ಮಾಡಿ ಮರು ಅಧಿಸೂಚನೆ ಸರ್ಕಾರ ಹೊರಡಿಸಬೇಕು. ಭಾರತೀಯ ಕೃಷಿ ಸಂಶೋಯ ಮಂಡಳಿ ಕೃಷಿ ಪದವಿಯ ಗೌರವ ಉಳಿಸಿ– ಕೃಷಿ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಿ ಎಂಬ ಘೋಷಣೆಯೊಂದಿಗೆ ಸರ್ಕಾರವು ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಿ ಕೃಷಿ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಪ್ರಕಾಶ್ ಕಮ್ಮರಡಿ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರುಗಳಾದ ಬಡಗಲೂರ ನಾಗರಾಜು, ಚೈತನ್ಯ ಸಂಬುಂದಸ್ವಾಮಿ, ದಲಿತ ಮುಖಂಡ ಯುವರಾಜ್ ಮಹಾಲಿಂಗ ಶಂಕರ್, ಕರ್ನಾಟಕ ಕೃಷಿ ವಿದ್ಯಾಲಯಗಳ ವಿದ್ಯಾರ್ಥಿ ವೇದಿಕೆಯ ಮುಖಂಡ ನಂದೀಶ್, ಸೇರಿದಂತೆ ರಾಜ್ಯದ ವಿವಿಧ ರೈತ, ಕಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಮತ್ತು ಪ್ರತಿನಿಧಿಗಳು ಉಪಸ್ಥಿತರಿದ್ದರು.















