ಬೆಂಗಳೂರು: ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ 5ನೇ ವರ್ಷದ ಸರ್ವಸದಸ್ಯರ ಸಭೆಯಲ್ಲಿ ಸಮುದಾಯದ ಏಳಿಗೆ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಹೇಳಿದರು.
ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಮುಖ ನಾಯಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಒಕ್ಕಲಿಗ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇಕಡ 4 ರಿಂದ ಶೇಕಡ 6ಕ್ಕೆ ಹೆಚ್ಚಿಸಬೇಕು. ಇದರೊಂದಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್.ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮಾದರಿಯಲ್ಲೇ ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಬೇಕು. ಇದಲ್ಲದೆ, ಕೆಇಡಿಬಿ, ಬಿಡಿಎ ಹಾಗೂ ಹೌಸಿಂಗ್ ಬೋರ್ಡ್ಗಳಲ್ಲಿ ಹಂಚಿಕೆಯಾಗುವ ನಿವೇಶನಗಳಲ್ಲೂ ನಮ್ಮ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು. ಈ ಎಲ್ಲದರ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಂಘದ ಆಡಳಿತ ಸುಧಾರಣೆಗೆ ಒತ್ತಾಯ:
ರಾಜ್ಯ ಒಕ್ಕಲಿಗರ ಸಂಘದ ಆಡಳಿತದಲ್ಲಿ ಪ್ರಸ್ತುತ ಇರುವ ಆರು ತಿಂಗಳಿಗೊಮ್ಮೆ ಪದಾಧಿಕಾರಿಗಳ ಬದಲಾವಣೆ ವ್ಯವಸ್ಥೆಯಿಂದ ಸಂಘದ ಬೆಳವಣಿಗೆಗೆ ಹಿನ್ನಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಐದು ವರ್ಷಗಳ ಸ್ಥಿರ ಆಡಳಿತಕ್ಕಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇರ ಚುನಾವಣೆ ಮೂಲಕ ಆಯ್ಕೆ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೂಡ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬೃಹತ್ ಗುರುವಂದನಾ ಕಾರ್ಯಕ್ರಮ:
ಮುಂದಿನ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಗುರುವಂದನಾ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ನೂತನ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಸಮುದಾಯದ ಪರವಾಗಿ ಬೆಂಬಲ ಮತ್ತು ಶಕ್ತಿಯನ್ನು ತುಂಬವ ಉದ್ದೇಶವಿದೆ ಎಂದು ಹೇಳಿದರು.
ಉಪಜಾತಿಗಳ ಒಗೂಡಿಸುವಿಕೆ:
ಸಮುದಾಯದಲ್ಲಿ ಹಂಚಿಹೋಗಿರುವ ಗಂಗಟ್ಕಾರ್, ಉಪ್ಪಿನ ಕೊಳಗ, ಸರ್ಪ ಒಕ್ಕಲಿಗ, ಕೂಡು ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ ಸೇರಿದಂತೆ ಎಲ್ಲಾ ಉಪಪಂಗಡಗಳನ್ನು ಒಕ್ಕಲಿಗ ಎನ್ನುವ ಒಂದೇ ಸೂರಿನಡಿ ತರಲು ಮಧುಸೂದನ ಆಯೋಗಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ಪೂಜ್ಯ ಜಗದ್ಗುರುಗಳ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ಮುಂಬರುವ ದಿನಗಳಲ್ಲಿ ಎಲ್ಲಾ ಉಪಪಂಗಡಗಳಿಗೂ ಸೂಕ್ತ ನ್ಯಾಯ ಸಿಗಲಿದೆ ಎನ್ನುವ ಭರವಸೆಯನ್ನು ನಾಗರಾಜ್ ಯಲಚವಾಡಿ ವ್ಯಕ್ತಪಡಿಸಿದರು.















