ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ ಪರಿಶಿಷ್ಟ ಜಾತಿ ಸದಸ್ಯರನ್ನು ದುರದ್ದೇಶಪೂರ್ವಕವಾಗಿ ಬೆದರಿಸುವ ಮತ್ತು ಅವರ ಘನತೆಗೆ ಧಕ್ಕೆ ತರಲು ಮುಂದಾಗಿರುವ ಕ್ರಮವನ್ನು ಪರಿಶಿಷ್ಟ ಜಾತಿ/ವರ್ಗ/ಕಾರ್ಮಿಕ ಅಲ್ಪಸಂಖ್ಯಾತರ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಪತ್ರಾಂಕಿತ ಹುದ್ದೆಗಾಗಿ ಲಂಚ ಪಡೆದಿದ್ದಾರೆ ಎಂದು ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಕಾಂತಕುಮಾರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ 3 ದೂರುಗಳನ್ನು ದಾಖಲಿಸಿದ್ದಾರೆ. ಇದು ಆಯೋಗದಲ್ಲಿರುವ ಪರಿಶಿಷ್ಟ ಜಾತಿಯವರ ಮನೋಬಲವನ್ನು ಕುಗ್ಗಿಸುವ ಮತ್ತು ಅವಹೇಳನ ಮಾಡುವ ಕುತಂತ್ರವಾಗಿದೆ ಎಂದು ದೂರಿದರು.
ಇಂತಹ ಆಧಾರರಹಿತ ಆರೋಪಗಳನ್ನು ಮಾಡಿ ದೂರು ನೀಡಿರುವ ಕಾಂತಕುಮಾರ್ ಅವರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕ್ರಮಕೈಗೊಳ್ಳಬೇಕು. ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಹುದ್ದೆ ಕೊಡಿಸುವುದಾಗಿ 1.50 ಕೋಟಿ ಹಣದ ಬೇಡಿಕೆ ಇಡಲಾಗಿದೆ ಎನ್ನುವ ಆರೋಪ ನಿಜವಾಗಿದ್ದರೆ ಸರ್ಕಾರ ಸ್ವತಂತ್ರ್ಯ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕೆ.ಪಿ.ಎಸ್.ಸಿ ಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ವಿವಿಧ ಅಧಿಕಾರಿಗಳ ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆಗಳನ್ನು ನಡೆಸಲಾಗಿತ್ತು. ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗಿತ್ತು. ಜೂನ್ ಎರಡನೇ ವಾರದಲ್ಲಿ ಸಂದರ್ಶನ ಪ್ರಕ್ರಿಯೆ ಪೂರ್ಣಗೊಂಡಿತ್ತು. ಸಂದರ್ಶನ ಪ್ರಕ್ರಿಯೆಯಲ್ಲಿನ ದಾಖಲೆಗಳು, ಅಭ್ಯರ್ಥಿಗಳ ಹೇಳಿಕೆಗಳು ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಪರಿಶೀಲಿಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಅಭ್ಯರ್ಥಿಗಳಿಗೆ ಹುದ್ದೆ ಕೊಡಿಸುವುದಾಗಿ ಹೇಳಿ ಹಣದ ವ್ಯವಹಾರದ ಮಾತುಕತೆ ನಡೆಸಲಾಗಿದೆ. ಸಂದರ್ಶನದ ನಂತರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ಆರೋಪಗಳು ಕೇಳಿಬಂದಿರುವುದು ಅಭ್ಯರ್ಥಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಮಾರಸಂದ್ರ ಮುನಿಯಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪಿ ಮೂರ್ತಿ, ನಾರಾಯಣ್, ರಮೇಶ್, ತ್ಯಾಗರಾಜ್, ವೇಣುಗೋಪಾಲ್ ಮೌರ್ಯ, ಬಸವರಾಜ್ ಕೌತಾಳ್, ಕೊದಂಡ, ನಾರಾಯಣ, ಕೋಡಿಗಲ್ ರಮೇಶ್ ಇತರರಿದ್ದರು.














