ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ದಲಿತರು ಹಾಗೂ ಸಾರ್ವಜನಿಕರಿಗೆ ವಿವಿಧ ಸರ್ಕಾರಿ ಇಲಾಖೆಗಳ ಮೂಲಕ ಆಗುತ್ತಿರುವ ಅನ್ಯಾಯಗಳನ್ನು ಖಂಡಿಸಿ ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ಜೈ ಮಾದಿಗರ ಬೌದ್ಧಿಕ ವೇದಿಕೆ, ಜೈಭೀಮ್ ದಲಿತ ಭೂರಕ್ಷಣಾ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ತಮಟೆ ಚಳವಳಿ ಹಾಗೂ ಪ್ರತಿಭಟನೆ ನಡೆಯಿತು.
ಈ ಕುರಿತು ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಬಿ.ಆರ್. ಮುನಿರಾಜ ಮಾತನಾಡಿ , ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ, ರಾಜಕಾಲುವೆ ಮತ್ತು ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಭೂದಾಖಲೆಗಳ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸರ್ಕಾರಿ ಜಾಗಗಳ ಅಕ್ರಮ ನೋಂದಣಿ ಹಾಗೂ ಒತ್ತುವರಿ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ನಗರದ ಹುತ್ತನಹಳ್ಳಿ ಗ್ರಾಮದ ಸರ್ವೇ ನಂ.72ರ ಸರ್ಕಾರಿ ಗೋಮಾಳ ಜಾಗಕ್ಕೆ ಸಂಬಂಧಿಸಿದಂತೆ ಗೇಲ್ ಗ್ಯಾಸ್ ಕಂಪನಿಗೆ ನೀಡಿರುವ ಜಾಗ ಹಂಚಿಕೆ ಆದೇಶವನ್ನು ಮರುಪರಿಶೀಲಿಸಬೇಕು. ಬಂಡಿಕೊಡಿಗೇಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ರಾಜಕಾಲುವೆ ಹಾಗೂ ಸ್ಮಶಾನ ಜಾಗದ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕೋರಿದರು.
ಇನ್ನು ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕಿ ಕೆ. ಮಂಜುಳ ಅವರಿಗೆ ಆಗಿದೆ ಎನ್ನಲಾದ ಅನ್ಯಾಯದ ಕುರಿತು ತನಿಖೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ಆಡಳಿತ ಮತ್ತು ಅನುಮತಿ ವಿಚಾರಗಳನ್ನೂ ಪರಿಶೀಲಿಸಬೇಕು. ದಲಿತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಮುನಿರಾಜು ಎಚ್ಚರಿಸಿದರು.














