ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು ಐದು ಕೋಟಿ ರೂ. ಮೌಲ್ಯದ 3.356 ಕೆ.ಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಐಎಎಲ್ನ ಟರ್ಮಿನಲ್ -2 ರ ಮೂಲಕ ಅಂತರಾಷ್ಟ್ರೀಯ ಮಟ್ಟದ ಕಳ್ಳಸಾಗಣೆಯ ಗ್ಯಾಂಗ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್ಐ ಅಧಿಕಾರಿಗಳು ಐವರು ಆರೋಪಿಗಳನ್ನು ಬಲೆಗೆ ಕೆಡವಿ ಅವರಿಂದ 5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ಹಾಗೂ ಕ್ಯಾಪ್ಸುಲ್ ಆಕಾರದ ಪ್ಯಾಕೆಟ್ಗಳಲ್ಲಿ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಜೆಗಳು ಸ್ಥಳೀಯರ ಸಹಕಾರದೊಂದಿಗೆ ಚಿನ್ನ ಕಳ್ಳಸಾಗಣೆ ಮಾಡಲು ಮುಂದಾಗಿದ್ದರು. ಅದರಂತೆ ಚಿನ್ನವನ್ನು ದೇಹದ ವಿವಿಧ ಅಂಗಗಳಲ್ಲಿ ಮರೆಮಾಚಿಕೊಂಡು ಶೌಚಾಲಯಗಳು ಮತ್ತು ಧೂಮಪಾನ ವಲಯಗಳಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಪಾಸ್ಕೋಡ್ ಬಳಸಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ವರ್ಗಾಯಿಸಲು ಮುಂದಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ವೇಳೆ ಗಡಿಯಾಚೆಗಿನ ಕಳ್ಳಸಾಗಣೆಯ ಸಿಂಡಿಕೇಟ್ನ ಭಾಗವಾಗಿ ಚಿನ್ನಕಳ್ಳಸಾಗಣೆ ನಡೆಯುತ್ತಿದೆ. ಇದರಲ್ಲಿ ವಿದೇಶಿಯರು-ಬಾಂಗ್ಲಾದೇಶಿ ಪ್ರಜೆಗಳು ಇರುವ ಶಂಕೆ ಇದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಪ್ರಮುಖ ಕಿಂಗ್ಪಿನ್ಗಳು ಹಾಗೂ ಈ ನೆಟ್ವರ್ಕ್ ಅನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.















