ಬೆಂಗಳೂರು: ಖಾಯಂ ಬೋಧಕ ಬೋಧಕೇತರ ಸಿಬ್ಬಂದಿಗಳ ಭಾರಿ ಕೊರತೆಯಿಂದಾಗಿ ಸಾರ್ವಜನಿಕ ವಿಶ್ವವಿದ್ಯಾಲಯಗಳ ಭವಿಷ್ಯ ಮುಸುಕಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ಆತಂಕ ವ್ಯಕ್ತಪಡಿಸಿದರು.
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ 69ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಂಭೀರ ಬಿಕ್ಕಟ್ಟಿನಲ್ಲಿ ಸಿಲುಕಿರುವ ಕರ್ನಾಟಕದ ಸಾರ್ವಜನಿಕ ವಿಶ್ವವಿದ್ಯಾಲಯಗಳ ಪುನಶ್ಚೇತನಕ್ಕೆ ಸರ್ಕಾರ ತುರ್ತು ಗಮನ ಹರಿಸಬೇಕು. ಅತೀ ಶೀಘ್ರದಲ್ಲಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಅರ್ಹತೆ ಮತ್ತು ಮೀಸಲಾತಿ ಮಾನದಂಡಗಳಿಗೆ ಅನುಗುಣವಾಗಿ ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ರಘುನಾಥ ಚ.ಹ. ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಬ್ಬ ವ್ಯಕ್ತಿಯಾಗಿರದೆ ಸಾರ್ವತ್ರಿಕ ಮೌಲ್ಯವಾಗಿದ್ದಾರೆ. ಕೇರಳದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ನಡೆಸಿದ ನಾರಾಯಣ ಗುರುಗಳ ಮಾರ್ಗದಲ್ಲಿ ಮುನ್ನಡೆದ ಅಂಬೇಡ್ಕರ್ ದೇಶಾದ್ಯಂತ ಸಮಾನತೆಯ ಸಂಘರ್ಷವನ್ನು ಪ್ರೇರೇಪಿಸಿದರು. ಜರತಾರಿ ಜಗದ್ಗುರುಗಳ ಇಂದಿನ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವ ಪ್ರಾಣಮಿತ್ರನಾದ ಬಾಬಾ ಸಾಹೇಬ್ ಅಂಬೇಡ್ಕರ್ ನಿಜವಾದ ವಿಶ್ವಗುರು ಎಂದರು.
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ್ ಬಿ. ಮಾತನಾಡಿ, ಅಂಬೇಡ್ಕರ್ ತಾತ್ವಿಕ ಚಿಂತನೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಬರೆದಿರುವ ಪುಸ್ತಕಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳುವುದು ಅಗತ್ಯಗತ್ಯ. ಭಾರತೀಯ ಸಮಾಜದ ಜಾತಿ, ವರ್ಣ, ವರ್ಗ, ಲಿಂಗ, ಬಡವ ಅಸಮಾನತೆಗಳ ನಿವಾರಣೆಗೆ ಸಂವಿಧಾನದ ಚೌಕಟ್ಟಿನಲ್ಲಿ ಪ್ರಜಾತಾಂತ್ರಿಕ ಪರ್ಯಾಯಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಂಗಾಯಣದ ಮಾಜಿ ನಿರ್ದೇಶಕ ಸಿ. ಬಸವಲಿಂಗಯ್ಯ, ವಿಶ್ವವಿದ್ಯಾಲಯದ ಕುಲಸಚಿವ ಎ. ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ್ ಬಿ.ಕುಡೇನಟ್ಟಿ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಸೇರಿದಂತೆ ಇತರರು ಇದ್ದರು.














