ಬೆಂಗಳೂರು: ಸಿದ್ದರಾಮಯ್ಯನವರೇ, ನೀವೇ ನೇಮಿಸಿದ ನ್ಯಾ.ನಾಗಮೋಹನ್ದಾಸ್ ಅವರ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವೇ ರಚಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವರದಿ ವೈಜ್ಞಾನಿಕ ಎಂದು ಒಪ್ಪಿಕೊಂಡಿದ್ದೀರಾ? ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿ ನಿರ್ಧಾರವನ್ನು ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಟೀಕಿಸಿದರು.
ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎಂದು ಸಿಎಂ ನಿರಂತರ ಭಾಷಣ ಮಾಡುತ್ತಾರೆ. ಅಹಿಂದ ವರ್ಗದ ಕುರಿತು ನಿಮಗೇನಾದರೂ ಬದ್ಧತೆ ಇದೆಯೇ? ಬದ್ಧತೆ ಇದ್ದರೆ ನೀವು ಸಾವಿರಾರು ಕೋಟಿ ಖರ್ಚು ಮಾಡಿ ವರದಿ ತರಿಸುತ್ತಿರಲಿಲ್ಲ. ಕೆಂಪರಾಜ್ ವರದಿ ಮೂಲೆಗುಂಪು ಮಾಡಿದ್ದೀರಿ. ಅದಾದ ಬಳಿಕ ಜಯಪ್ರಕಾಶ್ ಹೆಗ್ಡೆ ಅವರ ವರದಿ ಮೂಲೆಗುಂಪಾಗಿದೆ. ಮಧುಸೂದನ ನಾಯಕ್ ವರದಿ ಹೊರಗೆ ಬರಲೇ ಇಲ್ಲ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯ ಮಹಾ ಮೋಸಗಾರ:
ಸಿದ್ದರಾಮಯ್ಯನವರೇ, ನಿಮಗೆ ಬದ್ಧತೆ ಎಲ್ಲಿದೆ? ಜನರಿಗೆ ಮೋಸ ಮಾಡಿ, ಬಡವರನ್ನು ದಾರಿ ತಪ್ಪಿಸಿ ಬಡವರಿಗೆ ಅಹಿಂದ ನಾಯಕ ಎಂದು ಹೇಳಿ ಅಧಿಕಾರಕ್ಕೆ ಬರುವುದೊಂದೇ ನಿಮ್ಮ ಗುರಿಯಾಗಿತ್ತು. ಕುರ್ಚಿ ಉಳಿಸಿಕೊಳ್ಳಲು ನೀವು ಮಾಡುವುದನ್ನು ನೋಡಿದರೆ ಇದಕ್ಕಿಂತ ಹೆಚ್ಚಿನ ಮೋಸವನ್ನು ಪ್ರಪಂಚದಲ್ಲಿ ಬೇರೆ ಯಾರೂ ಮಾಡಲು ಸಾಧ್ಯ ಇಲ್ಲ ಅನಿಸುತ್ತದೆ. ಸಿದ್ದರಾಮಯ್ಯನವರು ಮಹಾ ಮೋಸಗಾರ ಎಂದು ಟೀಕಿಸಿದರು.
ಸಿಎಂ ಹೊಂದಾಣಿಕೆ ರಾಜಕಾರಣಿ:
ಸಿದ್ದರಾಮಯ್ಯ ಈಚೆಗೆ ಕೇವಲ ಹೊಂದಾಣಿಕೆ ರಾಜಕಾರಣಿ ಆಗಿದ್ದಾರೆ ಎಂದು ಅವರ ಸಂಪುಟದ ಸಚಿವ ಸತೀಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಅದು ಅಸತ್ಯವೇ ಸತ್ಯವೇ ಎಂದು ಮುಖ್ಯಮಂತ್ರಿಗಳೇ ಹೇಳಬೇಕು. ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರೂ ಕೂಡ ಸಿದ್ದರಾಮಯ್ಯನವರಿಗೆ ಬದ್ಧತೆ ಇಲ್ಲ ಎನ್ನುತ್ತಿದ್ದಾರೆ ಎಂದರು.
ಮೀಸಲಾತಿ ನಿರ್ಧಾರ ಒಪ್ಪಲಾಗುವುದಿಲ್ಲ:
ಮೀಸಲಾತಿ ವಿಷಯದಲ್ಲಿ ನಿನ್ನೆಯ ನಿರ್ಧಾರವನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸದಾಶಿವಯ್ಯ ವರದಿ, ನಾಗಮೋಹನ್ದಾಸ್ ವರದಿ, ನಮ್ಮದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಂಪುಟ ಉಪ ಸಮಿತಿ ವರದಿ ಇತ್ತು. ಸುಪ್ರೀಂ ಕೋರ್ಟ್ ಆದೇಶ ಇತ್ತು. ಯಾವುದನ್ನೂ ಪರಿಗಣಿಸದೇ ಖಾಜಿ ನ್ಯಾಯ ಮಾಡಿದ್ದಾರೆ. ಸಿದ್ದರಾಮಯ್ಯನವರು ಕೆಲವರನ್ನು ಸಾಕಲು ಈ ರೀತಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ನಾವು ವೈಜ್ಞಾನಿಕವಾಗಿ ಮೀಸಲಾತಿ ಕೊಟ್ಟಿದ್ದೆವು:
ನಾವು ವೈಜ್ಞಾನಿಕವಾಗಿ ಶೇ 17ಕ್ಕೆ ಹೆಚ್ಚಿಸಿ ಮೀಸಲಾತಿ ಕೊಟ್ಟಿದ್ದೆವು. ಅಂದಿನ ಕಾನೂನು ಸಚಿವ ಮಾಧುಸ್ವಾಮಿ ಅವರ ವರದಿ ಪಡೆದು ವೈಜ್ಞಾನಿಕವಾಗಿ ಹಂಚಿದ್ದೆವು. 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರ ಸಿಕ್ಕಿದರೆ ಒಳ ಮೀಸಲಾತಿ ಜಾರಿ ಮಾಡುವುದಾಗಿ ಸಿದ್ದರಾಮಯ್ಯನವರು ಹೇಳಿದ್ದರು. ಬಳಿಕ ಸಿದ್ದರಾಮಯ್ಯನವರು ಬೀದಿಯಲ್ಲಿ ಜನರನ್ನು ಬಡಿದಾಡಲು ಬಿಟ್ಟು ಅವರು ಆನಂದವಾಗಿ ವಿಧಾನಸೌಧದಲ್ಲಿ ಕಾಲ ಕಳೆದಿದ್ದರು ಎಂದು ಟೀಕಿಸಿದರು.
ಸಿದ್ದರಾಮಯ್ಯನವರೇ ಮೋಸದಾಟ ಬಿಡಿ:
ಎಸ್ಸಿ ಉಪ ಜಾತಿಗಳಲ್ಲಿ ಹೊಡೆದಾಟ ಹಚ್ಚುವುದು, ಕೋರ್ಟಿನಲ್ಲಿ ಬಿದ್ದು ಹೋಗಬೇಕೆಂಬ ಉದ್ದೇಶ ಇಟ್ಟುಕೊಳ್ಳುವುದು. ನಾನು ಮಾಡಿದ್ದೆ; ಕೋರ್ಟಿನಲ್ಲಿ ನಿಲ್ಲಲಿಲ್ಲ ಮುನಿಯಪ್ಪ; ಮಹದೇವಪ್ಪ ಎನ್ನುವುದು. ಇಂಥ ಮೋಸದಾಟವನ್ನು ಸಿದ್ದರಾಮಯ್ಯ ಬಿಡಬೇಕು ಎಂದು ಟೀಕಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಶಾಸಕ ಮಾನಪ್ಪ ಡಿ ವಜ್ಜಲ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.














