ಬೆಂಗಳೂರು: ಆನ್ಲೈನ್ ವ್ಯಾಪಾರದ ಪೈಪೋಟಿ ಮತ್ತು ಸರ್ಕಾರದ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳ ಬದುಕು ತೀವ್ರ ಸಂಕಷ್ಟಕ್ಕೆ ಈಡಾಗಿದೆ ಎಂದು ನವ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಕೇಶವಮೂರ್ತಿ ಬೇಸರ ವ್ಯಕ್ತಪಡಿಸಿದರು.
ಶನಿವಾರ ಗಾಂಧಿನಗರದ ರಾಮಕೃಷ್ಟ ಲಾಡ್ಜ್ ಎದುರಿನ ಮೆಜೆಸ್ಟಿಕ್ ಅಂಡರ್ ಪಾಸ್ ಬಳಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಅಣ್ಣಮ್ಮ ದೇವಿ ಅಮ್ಮನವರ ಉತ್ಸವ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನ ಶುಭ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ದಿನೇಶ್ ಗುಂಡೂರಾವ್ ಅವರು ಉತ್ಸವಕ್ಕೆ ಚಾಲನೆ ನೀಡಿ, ಪೂಜಾ ಕಾರ್ಯಗಳಲ್ಲಿ ಭಾಗವಹಿಸಿ ವ್ಯಾಪಾರಿಗಳಿಗೆ ಆಶೀರ್ವಾದ ಹಾಗೂ ಧೈರ್ಯ ತುಂಬಿದ್ದಾರೆ ಎಂದು ಹೇಳಿದರು.
ಗಾಂಧಿನಗರ ವಾರ್ಡ್ನಲ್ಲಿ ಸುಮಾರು 5,000ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದು, ಪ್ರತಿಯೊಬ್ಬರೂ ವಿಭಿನ್ನ ಹಿನ್ನೆಲೆಯಿಂದ ಬಂದು ಜೀವನ ನಡೆಸುತ್ತಿದ್ದಾರೆ. ಆದರೆ ಪ್ರಸ್ತುತ ಆನ್ಲೈನ್ ವ್ಯಾಪಾರದ ಪೈಪೋಟಿ ಮತ್ತು ಸರ್ಕಾರದ ಎತ್ತಂಗಡಿ ಕ್ರಮಗಳಿಂದಾಗಿ ಬೀದಿ ಬದಿ ವ್ಯಾಪಾರಿಗಳ ಬದುಕು ತೀವ್ರ ಸಂಕಷ್ಟಕ್ಕೆ ಈಡಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಮ್ಮ ಸಂಕಷ್ಟಕ್ಕೆ ಹಲವು ಮುಖಂಡರು ಹಾಗೂ ಜನಪ್ರತಿನಿಧಿಗಳು ಧ್ವನಿಗೂಡಿಸಿದ್ದು, ಸರ್ಕಾರ ಕೂಡ ತಕ್ಷಣ ಸ್ಪಂದಿಸಿ ಸಣ್ಣ ವ್ಯಾಪಾರಿಗಳ ಹಿತ ಕಾಯಬೇಕು ಎಂದು ಕೇಶವಮೂರ್ತಿ ಆಗ್ರಹಿಸಿದರು.
ಉಪಾಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ಮಾತನಾಡಿ, ನಾವು ಮಳೆ, ಚಳಿ ಹಾಗೂ ಬಿಸಿಲನ್ನು ಲೆಕ್ಕಿಸದೆ ದುಡಿಯುತ್ತಿದ್ದೇವೆ. ಸರ್ಕಾರ ನಮಗೆ ಕೆಲವೊಂದು ಸೌಲಭ್ಯಗಳನ್ನು ನೀಡಿದ್ದರೂ, ಮುಖ್ಯ ರಸ್ತೆಗಳ ಬದಿಯಲ್ಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಿರುವುದು ಸಮಸ್ಯೆಯಾಗಿದೆ. ಈಗಾಗಲೇ ವೆಂಡಿಂಗ್ ಝೋನ್ ಗುರುತಿಸಲು ಸಮೀಕ್ಷೆ ನಡೆಸಲಾಗಿದ್ದರೂ, ಇನ್ನೂ ಅಧಿಕೃತ ಅನುಮೋದನೆ ನೀಡಲಾಗಿಲ್ಲ. ವೈಜ್ಞಾನಿಕವಾಗಿ ಜನರು ಹೆಚ್ಚಾಗಿ ಓಡಾಡುವ ಸೂಕ್ತ ಸ್ಥಳಗಳಲ್ಲಿ ಝೋನ್ ನಿರ್ಮಿಸಿ, ವ್ಯಾಪಾರಿಗಳಿಗೆ ಪರವಾನಗಿ ನೀಡಿ ಹಾಗೂ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಮನವಿ ಮಾಡಿದರು.
ವ್ಯಾಪಾರಿಗಳು ಬಾಡಿಗೆ ನೀಡಲು ಸಹ ಸಿದ್ಧರಿದ್ದಾರೆ. ಗಾಂಧಿನಗರದಂತಹ ಜನನಿಬಿಡ ಪ್ರದೇಶಗಳಲ್ಲಿ ಜಾಗದ ಅಭಾವವಿದ್ದು, ಸೂಕ್ತ ಸ್ಥಳಗಳನ್ನು ಗುರುತಿಸಿ ವ್ಯವಸ್ಥೆ ಕಲ್ಪಿಸಿದರೆ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಅನುಕೂಲವಾಗಲಿದೆ ಎಂದು ಪುನರುಚ್ಚರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತವತ್ಸಲ, ಉಪಾಧ್ಯಕ್ಷ ದೊಡ್ಡಣ್ಣ ಬಿ.ಕೆ, ಖಜಾಂಚಿ ಆಶಾ ಆರ್ ಮತ್ತಿತರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.














