ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ.
ಮುಖ್ಯಮಂತ್ರಿಗಳು ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ (ಮುಕ್ತಾಯ ವರದಿ) ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಗುರುವಾರ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನೋಟಿಸ್ ಜಾರಿ ಮಾಡಿದೆ.
ಖಾಸಗಿ ದೂರುದಾರರಾದ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಈ ಮಹತ್ವದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಗುರುವಾರ ಕೈಗೆತ್ತಿಕೊಂಡಿತು. ವಿಚಾರಣೆ ಆರಂಭವಾಗುತ್ತಿಿದ್ದಂತೆ ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದಲ್ಲಿ ಸಲ್ಲಿಸಿರುವ ‘ಬಿ’ ರಿಪೋರ್ಟ್ ಅನ್ನು ಪ್ರಶ್ನಿಸುತ್ತಿರುವುದಾಗಿ ತಿಳಿಸಿದರು ಹಾಗೂ ಇದೊಂದು ರೀತಿಯಲ್ಲಿ ಕೇವಲ ಸಮಿತಿ ವರದಿಯಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಾದ ಆಲಿಸಿದ ನ್ಯಾಯಪೀಠವು ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿತು. ಇದರ ಜತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮತ್ತು ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.















