ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಣವೇ ಉನ್ನತ ಹಂತಕ್ಕೇರುವ ತಳಹದಿ. ಯಾರು ಸರ್ಕಾರಿ ಶಾಲೆಯಲ್ಲಿ ಕಷ್ಟಪಟ್ಟು ಒದಿ ಬೆಳೆಯುತ್ತಾರೋ ಉನ್ನತ ಅಧಿಕಾರವನ್ನು ಅಲಂಕರಿಸುತ್ತಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಸಂಚಾಲಕ ಮತ್ತು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನಟರಾಜ್ ಗೌಡ.
ಮಂಗಳವಾರ ಪಿನಾಕನ್ ಆಶ್ರಯ ಸೇವಾ ಟ್ರಸ್ಟ್ ವತಿಯಿಂದ ಕೆಪಿಸಿಸಿ ಪ್ರಚಾರ ಸಮಿತಿಯ ಸಂಚಾಲಕ ಮತ್ತು ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನಟರಾಜ್ ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವನ ಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪೆನ್ನು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಪ್ರಧಾನಿ, ರಾಷ್ಟ್ರಪತಿಯಾದ ಹಲವರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಳೆದು ಬಂದವರು ಹಾಗಾಗಿ ಮುಂದೆ ಉನ್ನತ ಅಧಿಕಾರ ಹೊಂದಲು ಉನ್ನತ ಗುರಿಗಳನ್ನು ಇಲ್ಲಿನ ವಿದ್ಯಾರ್ಥಿಗಳು ಹೊಂದಿರಬೇಕು ಎಂದರು.
ಸಮಾಜ ಸೇವೆ ಮಾಡುವ ಉದ್ದೇಶ ಇಟ್ಟುಕೊಂಡಿರುವ ಪಿನಾಕನ್ ಆಶ್ರಯ ಸೇವಾ ಟ್ರಸ್ಟ್, ನನ್ನ ಹುಟ್ಟು ಹಬ್ಬದ ಅಂಗವಾಗಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಈ ಸೇವಾ ಟ್ರಸ್ಟ್ ವತಿಯಿಂದ ಹಲವು ಸೇವಾ ಕಾರ್ಯಗಳನ್ನು ಯುವಕರು ಹಮ್ಮಿಕೊಳ್ಳುತ್ತಿದ್ದಾರೆ. ಇವರೆಲ್ಲ ತುಂಬಾ ಕಷ್ಟು ಪಟ್ಟು ದುಡಿದು, ಕುಟುಂಬವನ್ನು ನಿರ್ವಹಿಸಿ ನಂತರ ಉಳಿದ ಹಣದಿಂದ ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇಂದು ನನ್ನ ಹುಟ್ಟು ಹಬ್ಬದ ಪ್ರಯುಕ್ತ ಸ್ಕೂಲ್ ಮಕ್ಕಳಿಗೆ ಬ್ಯಾಗ್, ಪುಸ್ತಕಗಳು, ಪೆನ್, ಪೆನ್ಸಿಲ್ ಗಳನ್ನು ನನ್ನ ಮೂಲಕ ಕೊಡುವ ಮೂಲಕ ಹುಟ್ಟು ಹಬ್ಬವನ್ನು ವಿಶೇಷವಾಗಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಪಿನಾಕನ್ ಆಶ್ರಯ ಸೇವಾ ಟ್ರಸ್ಟ್ ನ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಹಲವು ಸಮಾಜಮುಖಿ ಕೆಲಸಗಳನ್ನು ನಮ್ಮ ಟ್ರಸ್ಟ್ ನಿರಂತರವಾಗಿ ನಡೆಸುತ್ತಿದೆ. ನಟರಾಜ್ ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಇಂದಿನ ಬ್ಯಾಗ್, ಪುಸ್ತಕ ವಿತರಣಾ ಕಾರ್ಯಕ್ರಮ ಸೇವಾ ಕಾರ್ಯಕ್ಕೆ ಇನ್ನಷ್ಟು ಪ್ರೋತ್ಸಾಹವನ್ನು ನೀಡಿದೆ. ಬೀದಿ ಬದಿಯಲ್ಲಿ ವಾಸಿಸುವವರು, ವಯಸ್ಸಾದವರ, ಬಡ ವಿದ್ಯಾರ್ಥಿಗಳ ನೆರವಿಗೆ ಟ್ರಸ್ಟ್ ಸದಾ ಇರಲಿದೆ ಎಂದು ಹೇಳಿದರು.
ಟ್ರಸ್ಟ್ ನ ಸಂಸ್ಥಾಪಕ ಶಶಿಕಿರಣ್ ಆರ್ ಮಾತನಾಡಿ, ಇಂದಿನ ಕಾರ್ಯಕ್ರಮ ಮನಸ್ಸಿಗೆ ಮುದ ನೀಡಿದ್ದು, ಇನ್ನಷ್ಟು ಕೆಲಸ ನಿರ್ವಹಿಸಲು ಪ್ರೇರಣೆಯಾಗಿದೆ. ಕಳೆದ 6 ತಿಂಗಳಿಂದ ಸತತ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಇದೇ ಮಾದರಿಯಲ್ಲಿ ಹುಮ್ಮಸ್ಸಿನಿಂದ ಮುನ್ನಡೆಯಲಿದ್ದೇವೆ ಎಂದು ತಿಳಿಸಿದರು.
ಪಿನಾಕನ್ ಆಶ್ರಯ ಸೇವಾ ಟ್ರಸ್ಟ್ ಉಪಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಕವಿರಾಜ್, ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ್ ಸೇರಿದಂತೆ ಟ್ರಸ್ಟ್ ನ ಮತ್ತಿತರರ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.















