ಬೆಂಗಳೂರು: ರೆಡ್ ಕ್ರಾಸ್ ಕಳೆದ 100 ವರ್ಷಗಳಿಂದ ನಿಸ್ವಾರ್ಥ ಸೇವೆಯ ಮೂಲಕ ಸಮಾಜದ ನಂಬಿಕೆಯನ್ನು ಗಳಿಸಿರುವ ಮಹಾನ್ ಸಂಸ್ಥೆಯಾಗಿದೆ ಎಂದು ತಿಳಿಸಿದರು.
ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸೇವಾಭಾವ, ಕರುಣೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಸಿಆರ್ಪಿಎಫ್ ಕರ್ನಾಟಕ-ಕೇರಳ ಸೆಕ್ಟರ್ನ ಪೊಲೀಸ್ ಮಹಾನಿರೀಕ್ಷಕ ಡಾ. ವಿಪುಲ್ ಕುಮಾರ್ ಮಾತನಾಡಿ, ಪ್ರಕೃತಿ ವಿಕೋಪಗಳು, ಅಪಘಾತಗಳು ಹಾಗೂ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮಾನವೀಯ ಸೇವೆ ಅತ್ಯಂತ ಅಮೂಲ್ಯವಾಗಿದೆ. ಸೇವೆ, ಸಹಾನುಭೂತಿ ಮತ್ತು ಮಾನವೀಯತೆ ಎಂಬ ಮೌಲ್ಯಗಳು ಪ್ರತಿಯೊಬ್ಬರ ಜೀವನದಲ್ಲಿ ಬೆಳೆಸಿಕೊಳ್ಳಬೇಕಾದ ಗುಣಗಳಾಗಿವೆ ಎಂದು ಹೇಳಿದರು.
ಖ್ಯಾತ ಶಿಕ್ಷಣ ತಜ್ಞರು ಹಾಗೂ ಸಮಾಜಚಿಂತಕರಾದ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಸರ್ ಜೀನ್ ಹೆನ್ರಿ ಡ್ಯೂನಾಂಟ್ ಅವರು ಆರಂಭಿಸಿದ ಮಾನವೀಯ ಚಳುವಳಿ ಇಂದು ವಿಶ್ವದಾದ್ಯಂತ ಕೋಟಿ ಕೋಟಿ ಜನರಿಗೆ ಆಶಾಕಿರಣವಾಗಿದೆ, ಯುವಜನರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರಿವರ್ತನೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ವರ್ಷದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಘೋಷವಾಕ್ಯವಾದ ಯುನಿಟೆಡ್ ಇನ್ ಹ್ಯೂಮನಿಟಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಿಪಾದಿಸಲಾಯಿತು. ಮಾಗಡಿ ರಸ್ತೆಯ ಕುಷ್ಠರೋಗ ಆಸ್ಪತ್ರೆಯ ಒಳರೋಗಿಗಳಿಗೆ ಕಂಬಳಿ ಹಾಗೂ ಹಣ್ಣಿನ ಕೂಡುಗಳನ್ನು ವಿತರಿಸಿ ಮಾನವೀಯ ಕಾಳಜಿಯನ್ನು ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಪದಾಧಿಕಾರಿಗಳು, ಯುವ ರೆಡ್ ಕ್ರಾಸ್ ಸ್ವಯಂಸೇವಕರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಾಕಾಂತ್ ಮತ್ತಿತರರು ಭಾಗವಹಿಸಿದ್ದರು.















