ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸಮಸ್ಯೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ಕೂಡ ನಡೆಯಿತು.
ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಹೆಲಿಕಾಪ್ಟರ್ ಮೂಲಕ ಗೋಕಾಕ್ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಅವರು ಹರಿಹಾಯ್ದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್, ಎಸ್. ಪಿಗಳಾದ ಡಾ. ಕೆ. ರಾಮರಾಜನ್ ಮತ್ತು ಭೂಷಣ್ ಬೊರ್ಸೆ, ಜಿಪಂ ಸಿಇಒ ರಾಹುಲ್ ಶಿಂದೆ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲೆಯ ರಸ್ತೆ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದ ಸತೀಶ್ ಜಾರಕಿಹೊಳಿ ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರವೇ ಪೂರ್ಣಗೊಳಿಸಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಕಿವಿಮಾತು ಹೇಳಿದರು.
ಸಭೆಯ ನಂತರ ಶಾಸಕ ಆಸೀಫ್ ಸೇಠ್ ಮತ್ತು ಬಾಬಾಸಾಹೇಬ್ ಪಾಟೀಲ್ ಅವರುಗಳೊಂದಿಗೆ ಹೆಲಿಕಾಪ್ಟರ್ ಮೂಲಕ ಅವರು ಬಳ್ಳಾರಿಗೆ ಪ್ರಯಾಣ ಬೆಳೆಸಿದರು.















