ಬೆಂಗಳೂರು: ಒಕ್ಕಲಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಹಕ್ಕುಗಳ ರಕ್ಷಣೆ ಹಾಗೂ ಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಸರಿಪಡಿಸಬೇಕು ಎಂದು ಮಾಜಿ ಸಂಸದ ಶಿವರಾಮೇಗೌಡ ತಿಳಿಸಿದರು.
ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಮುಖ ನಾಯಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಏಳ್ಗೆ ಹಾಗೂ ಭವಿಷ್ಯದ ಪೀಳಿಗೆಯ ಹಿತದೃಷ್ಟಿಯಿಂದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ಹಿಂದೆ ಒಕ್ಕಲಿಗ ಸಮುದಾಯಕ್ಕೆ ಇದ್ದ ಶೇ. 12 ರಷ್ಟು ಮೀಸಲಾತಿಯು ಹಂತ ಹಂತವಾಗಿ ಶೇ. 8ಕ್ಕೆ ಹಾಗೂ ನಂತರ ಶೇ. 4ಕ್ಕೆ ತಂದು ನಿಲ್ಲಿಸಲಾಗಿದೆ. ಬರುವಂತಹ ಮುಂದಿನ ಪೀಳಿಗೆಗೆ ಸೂಕ್ತ ಭವಿಷ್ಯ ರೂಪಿಸಲು ಮತ್ತು ಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕಾಂತರಾಜ್ ಆಯೋಗದ ವರದಿಯಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಅದನ್ನ ಕೋರ್ಟ್ ಮಟ್ಟದಲ್ಲಿ ಕಾನೂನು ಹೋರಾಟ ನಡೆಸಿ ತಡೆ ತರಲಾಗಿತ್ತು. ಇದರಿಂದ ಬೇರೆ ಯಾವುದೇ ಸಮುದಾಯಕ್ಕೆ ತೊಂದರೆ ಮಾಡುವುದು ನಮ್ಮ ಉದ್ದೇಶವಲ್ಲ, ಆದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದಷ್ಟೇ ನಮ್ಮ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.
ಸಮುದಾಯದ ಮಠಗಳು ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತವಾಗಿ ಕೆಲಸ ಮಾಡುತ್ತಿವೆ. ಅದೇ ರೀತಿ ಒಕ್ಕಲಿಗರ ಸಂಘವು ಸಹ ಅನೇಕ ಶಾಲಾ-ಕಾಲೇಜುಗಳು, ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಇಡೀ ರಾಜ್ಯದ ಒಕ್ಕಲಿಗ ಸಮುದಾಯದ ಪರವಾಗಿ ಅಭಿನಂದನೆ ಮತ್ತು ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲೇ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಶಿವರಾಮೇಗೌಡ ತಿಳಿಸಿದರು.















