ಬೆಂಗಳೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಲಿದೆ. ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿನ ಪರೀಕ್ಷೆ ವ್ಯವಸ್ಥೆಯ ವೈಫಲ್ಯ ಮತ್ತು ಭ್ರಷ್ಟಚಾರ ಎದ್ದು ಕಾಣುತ್ತಿದೆ ಎಂದು ಆರೋಪಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ್ ಹೆಚ್.ಎಸ್ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ವೇಳೆ ಹೆಚ್.ಎಸ್.ಮಂಜುನಾಥ್ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸತತವಾಗಿ ಹಗರಣದ ಮಾದರಿಯಲ್ಲಿ ನಡೆಯುತ್ತಿದೆ. 2024ರಲ್ಲಿ ಮತ್ತು 2026ರಲ್ಲಿ ಈ ರೀತಿಯ ಪ್ರಕರಣಗಳು ನಡೆದಿವೆ. ಲಕ್ಷಾಂತರ ಬಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲದಾಗಿದೆ. ಕಾಪಿ ಹೊಡೆದು ಪಾಸಾಗುವ ಶ್ರೀಮಂತ ಕುಟುಂಬದ ಮಕ್ಕಳು ವೈದ್ಯರಾಗುತ್ತಿದ್ದಾರೆ ಎಂದು ಕಿಡಿಕಾರಿದರು.
ಹಲವಾರು ತಿಂಗಳು ಕಾಲ ಫೀಸು ಕಟ್ಟಿ ನೀಟ್ ಪರೀಕ್ಷೆ ತಯಾರುಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೇ ತಯಾರಿಗೆ ಹಣ ಖರ್ಚು ಮಾಡಬೇಕಾಗುತ್ತದೆ. ಬಡವರು, ರೈತರ ಸಂಕಷ್ಟಗಳು ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ. 22 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ ಮತ್ತೆ ಮರು ಪರೀಕ್ಷೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಶಿಕ್ಷಣ ಕುರಿತು ಅರಿವು ಇಲ್ಲದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೊತೆ ಚಲ್ಲಾಟವಾಡುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿ.ಎಸ್.ಐ.ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿತ್ತು. ಬಿಜೆಪಿ ಪ್ರಶ್ನೆ ಪತ್ರಿಕೆ ಸೋರಿಕೆಯ ರೂವಾರಿಗಳು. ಕೇಂದ್ರ ಸರ್ಕಾರ ಪ್ರತಿವರ್ಷ 2 ಕೋಟಿ ಉದ್ಯೋಗ ನೀಡಿಲ್ಲ, ಅದರೆ ನಮ್ಮ ಸರ್ಕಾರದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಗೊತ್ತಾಗುತ್ತಿಲ್ಲ. ಮೊದಲು ಪೇಪರ್ ಸೋರಿಕೆ ಮಾಫಿಯಾಗೆ ಕಡಿವಾಣ ಹಾಕಬೇಕು ಮತ್ತು ಇದರ ಹಿಂದಿನ ಶಕ್ತಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.















