ಬೆಳಗಾವಿ: 2026ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳುಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಬರೆಯುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಪತ್ರ ಬರೆದಿದ್ದಾರೆ.
ಈಗಾಗಲೇ ವಿದ್ಯಾರ್ಥಿಗಳು ಸಾಕಷ್ಟು ಅಧ್ಯಯನ ಮಾಡಿ ಪರೀಕ್ಷೆ ಬರೆಯಲು ಸಿದ್ಧರಾಗಿರುವಿರಿ. ಈ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವುದೇ ಭಯವಿಲ್ಲದೆ, ಒತ್ತಡ ರಹಿತ ಹಾಗೂ ಆಸಕ್ತಿಯಿಂದ ಪರೀಕ್ಷೆಗಳನ್ನು ಬರೆಯುವುದು ಮುಖ್ಯವಾಗಿದೆ. ಈ ಪರೀಕ್ಷೆಯು ನಿಮ್ಮ ಜೀವನದಲ್ಲಿ ನಿರ್ಣಾಯಕ ಹಂತವಾಗಿದೆ. ಆದ್ದರಿಂದ ಪ್ರಥಮವಾಗಿ ಶಾಂತ ರೀತಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಓದಿ ಅರ್ಥೈಸಿಕೊಂಡು, ತಮಗೆ ಸುಲಭವಾಗಿರುವ ಪ್ರಶ್ನೆಗಳನ್ನು ಬಿಡಿಸಿ. ನಂತರ ಇನ್ನುಳಿದ ಪ್ರಶ್ನೆಗಳಿಗೆ ಉತ್ತರವನ್ನು ಬಿಡಿಸುವುದರಿಂದ ನಿಗದಿತ ಅವಧಿಯೊಳಗೆ ಪ್ರಶ್ನೆಗಳನ್ನು ಉತ್ತರಿಸಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.
ನಮ್ಮ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಭಯ, ಆತಂಕ, ತೊಂದರೆಗಳು ಮತ್ತು ಅನ್ಯಾಯವಾಗದಂತೆ ಸುಗಮ, ಸರಳತೆಯಿಂದ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಳ್ಳಲಾಗಿದೆ. ನಮ್ಮ ಜಿಲ್ಲೆಯು ಅತ್ಯುತ್ತಮ ಫಲಿತಾಂಶ ಪಡೆಯಲು ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಅಧಿಕಾರಿಗಳು ಕಾರ್ಯತತ್ಪರರಾಗಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ ವತಿಯಿಂದ ಪ್ರೋತ್ಸಾಹಿಸಲಾಗುವುದು ಹಾಗೂ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗುವುದು. ಆದ್ದರಿಂದ, ಪ್ರಿಯ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಆತ್ಮ ಸ್ಥೈರ್ಯದಿಂದ ಈ ಪರೀಕ್ಷೆಯನ್ನು ಬರೆದು ಯಶಸ್ವಿಯಾಗುವಿರಿ ಎನ್ನುವ ವಿಶ್ವಾಸವಿದೆ ಹಾಗೂ ತಮ್ಮ ಮುಂದಿನ ಜೀವನದ ಉಜ್ವಲ ಭವಿಷ್ಯಕ್ಕಾಗಿ ಇದು ಉತ್ತಮ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯಬೇಕು ಎಂದಿದ್ದಾರೆ.















